ಕೊಪ್ಪಳ: ಈ ಬಾರಿಯ ನೈಋತ್ಯ ಮುಂಗಾರು ಹಂಗಾಮಿಗೆ ದಿನಗಣನೆ ಆರಂಭವಾಗಿದ್ದು, ಹಿಂಗಾರು ಮಳೆ ಆರ್ಭಟ ಜೋರಾಗಿದೆ. ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ರೈತರು ಸಹ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ.
ಕೊಪ್ಪಳದಲ್ಲಿ ಮುಂಗಾರು ಹಂಗಾಮು ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹಾಗೂ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಚಾಲನೆ ನೀಡಿದರು.
2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೆಸರು ಕಾಳು, ಮೆಕ್ಕೆಜೋಳ, ಸಜ್ಜೆ, ತೊಗರಿ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೀಜಗಳನ್ನು ರೈತರಿಗೆ ಸಾಂಕೇತಿಕವಾಗಿ ವಿತರಣೆ ಮಾಡಲಾಯಿತು.
ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, “ತಾಲೂಕಿನ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಿ ಸರ್ಕಾರದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು.
ಮುಂಗಾರು ಹಂಗಾಮಿಗೆ ಒಟ್ಟು 62,568 ಹೆಕ್ಟೇರ್ ಬಿತ್ತನೆ ಕ್ಷೇತ್ರದ ಗುರಿ ಹೊಂದಿದ್ದು, ತಾಲೂಕಿನಲ್ಲಿ ಮುಂಗಾರು ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ 4 ರೈತ ಸಂಪರ್ಕ ಕೇಂದ್ರ ಹಾಗೂ ಎರಡು ಹೆಚ್ಚುವರಿ ಬೀಜ ವಿತರಣಾ ಕೇಂದ್ರದ ಮೂಲಕ ಕೈಗೊಳ್ಳಲಾಗಿದೆ.
ಕೊಪ್ಪಳ ತಾಲೂಕಿಗೆ ಸಂಬಂಧಿಸಿದಂತೆ ಪ್ರಸ್ತುತ 50 ಕ್ವಿಂಟಾಲ್ ಹೆಸರು, 65 ಕ್ವಿಂಟಾಲ್ ತೊಗರಿ, 5 ಕ್ವಿಂಟಾಲ್ ನವಣೆ, 250 ಕ್ವಿಂಟಾಲ್ ಮೆಕ್ಕೆಜೋಳ ದಾಸ್ತಾನು ಲಭ್ಯವಿದ್ದು ಬೇಡಿಕೆ ಹಾಗೂ ಅವಶ್ಯಕತೆಗನುಗುಣವಾಗಿ ಬೀಜಗಳ ದಾಸ್ತಾನು ಮಾಡಿ ಮಾರ್ಗಸೂಚಿಯನ್ವಯ ರೈತರಿಗೆ ವಿತರಣೆ ಮಾಡಲಾಗುತ್ತಿದೆ.
ಜಿಲ್ಲಾಧಿಕಾರಿಗಳು ಮಾತನಾಡಿ, “ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ತೊಂದರೆಯಾದಲ್ಲಿ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಹ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳು ನಿಯಮಿತವಾಗಿ ನಡೆಯಬೇಕು” ಎಂದರು.